ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.
A Kannada book by Akshara Prakashana / ಅಕ್ಷರ ಪ್ರಕಾಶನ
ಕೀರ್ತಿನಾಥ ಕುರ್ತಕೋಟಿಯವರು ೧೩, ಅಕ್ಟೋಬರ್ ೧೯೨೮ರಂದು ಗದಗ ಸಮೀಪದ ಕುರ್ತಕೋಟಿಯಲ್ಲಿ ಜನಿಸಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದ ಇವರು ಗದಗದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದು, ಮುಂದೆ ಸುಮಾರು ಮೂರು ದಶಕಗಳ ಕಾಲ ಗುಜರಾತಿನ ಆನಂದದ ವಲ್ಲಭ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು; ನಿವೃತ್ತಿಯ ನಂತರ ಧಾರವಾಡದಲ್ಲಿ ಬಂದು ನೆಲೆಸಿದರು. ಹಲವು ಭಾಷೆಗಳ ಸಾಹಿತ್ಯದ ಕುರಿತು ಮಾತಾಡಬಲ್ಲವರಾಗಿದ್ದ ಕೀರ್ತಿಯವರು ತಮ್ಮ ವಿದ್ವತ್ತು ಮತ್ತು ವಿಮರ್ಶೆಗಳಿಂದ ಪ್ರಸಿದ್ಧರು. ಬರವಣಿಗೆಯಷ್ಟೇ ತಮ್ಮ ವಾಗ್ಮಿತೆಗೂ ಪ್ರಸಿದ್ಧರಾಗಿದ್ದ ಇವರು ’ಯುಗಧರ್ಮ ಹಾಗೂ ಸಾಹಿತ್ಯದರ್ಶನ’, ’ಬಾರೋ ಸಾಧನಕೇರಿಗೆ’, ’ಕುಮಾರವ್ಯಾಸ’, ’ಉರಿಯ ನಾಲಗೆ’, ’ಪ್ರತ್ಯಭಿಜ್ಞಾನ’, ’ಕನ್ನಡ ಸಾಹಿತ್ಯ ಸಂಗಾತಿ’, ’ಸಂಸ್ಕೃತಿ ಸ್ಪಂದನ’ ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮೊದಲಾದ ಹಲವು ಪುರಸ್ಕಾರಗಳು ಇವರಿಗೆ ಲಭಿಸಿವೆ. ಇವರು ೨೦೦೩ರಲ್ಲಿ ನಿಧನರಾದರು.