ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.
A Kannada book by Akshara Prakashana / ಅಕ್ಷರ ಪ್ರಕಾಶನ
1955ರಲ್ಲಿ ಜನಿಸಿದ ಪ್ರತಿಭಾ ನಂದಕುಮಾರ್ ಅವರು ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್. ಪದವಿ ಪಡೆದು ಬಳಿಕ ಕನ್ನಡ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ನಡೆಸಿದರು. ಕನ್ನಡದಲ್ಲಿ ಕವಿಯಾಗಿ ಗಮನ ಸೆಳೆಯುತ್ತಲೇ ಅವರು ಹಲವು ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಕೆಲಸ ಮಾಡಿದರು; ಪ್ರಸ್ತುತ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೇ ಅಲ್ಲದೆ ಅವರಿಗೆ ಶಿವರಾಮ ಕಾರಂತ ಪ್ರಶಸ್ತಿ, ಪುತಿನ ಕಾವ್ಯ ಪ್ರಶಸ್ತಿ, ಬಿ.ಎಚ್. ಶ್ರೀಧರ ಕಾವ್ಯ ಪ್ರಶಸ್ತಿ, ಮಹಾದೇವಿ ವರ್ಮಾ ಕಾವ್ಯ ಪ್ರಶಸ್ತಿ ಮೊದಲಾದ ಗೌರವಗಳು ಬಂದಿವೆ. ‘ನಾವು ಹುಡುಗಿಯರೇ ಹೀಗೆ’, ‘ಈತನಕ’, ‘ರಸ್ತೆಯಂಚಿನ ಗಾಡಿ’, ‘ಕವಡೆಯಾಟ’, ‘ಅಹಾ, ಪುರುಷಾಕಾರಂ!’ ‘ಅವರು ಪುರಾವೆಗಳನ್ನು ಕೇಳುತ್ತಾರೆ’ ಮೊದಲಾದ ಕಾವ್ಯಸಂಕಲನಗಳನ್ನು ಪ್ರಕಟಿಸಿರುವ ಇವರ ಸಮಗ್ರಕವಿತೆಗಳು ‘ಮುನ್ನುಡಿ ಬೆನ್ನುಡಿಗಳ ನಡುವೆ’ ಎಂಬ ಹೆಸರಿನಲ್ಲಿ ಸಂಗ್ರಹಗೊಂಡಿವೆ. ‘ಯಾನ’ ಎಂಬ ಕಥಾಸಂಕಲನ, ಅಂಕಣಬರಹಗಳ ಸಂಕಲನಗಳಾದ ‘ನಿಮ್ಮಿ’, ‘ಪ್ರತಿಧ್ವನಿ’ ಮೊದಲಾದವು ಅವರ ಇನ್ನಿತರ ಪ್ರಕಟಿತ ಕೃತಿಗಳು.